ಬೆಂಗಳೂರು:ಬಿಬಿಎಂಪಿಯು ಪ್ರಸಕ್ತ ಸಾಲಿನ ಆಯವ್ಯಯವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಡಿಸಲು ಪೂರ್ವ ಸಿದ್ಧತೆ ನಡೆಸಿದೆ.
ಕೊರೊನಾ ಮಹಾಮಾರಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಏ.20 ರಂದು ವೀಡಿಯೋ ಕಾನ್ಪರೆನ್ಸ್ ಮೂಲಕ ಮಂಡಿಸಲು ಸಿದ್ಧತೆ ನಡೆಸಿದೆ. ಪಾಲಿಕೆ ಸದಸ್ಯರುಗಳಿಗೆ ಆಯಾ ವಲಯಗಳ ಮಟ್ಟದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸಭೆ ಸೇರಲು ಸೂಚಿಸಲಾಗಿದೆ.
ಮಹಾಪೌರ ಗೌತಮ್ ಕುಮಾರ್ ಪಾಲಿಕೆ ಕೇಂದ್ರ ಕಚೇರಿ ಕೆಂಪೇಗೌಡ ಪೌರ ಸಭಾಂಗಣಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆ ಪರಿಶೀಲಿಸಿದ್ದಾರೆ. ಆ ನಂತರ ಎಲ್ಲ 8 ವಲಯಗಳ ಜಂಟಿ ಆಯುಕ್ತರ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ, ವ್ಯವಸ್ಥಿತವಾಗಿ ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಲಾಕ್ ಡೌನ್ ನಿಂದಾಗಿ ಬಿಬಿಎಂಪಿ ಆರ್ಥಿಕ ಪರಿಸ್ಥಿತಿ ಹೆಚ್ಚಿನ ಮಟ್ಟದಲ್ಲಿ ಕುಸಿತ ಕಂಡಿದೆ. ಅಕ್ರಮ- ಸಕ್ರಮ ಯೋಜನೆ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿರುವ ಮಧ್ಯೆ ಬಿ ಖಾತಾಗಳನ್ನು ಎ ಖಾತಾಗಳನ್ನಾಗಿ ಪರಿವರ್ತಿಸುವ ಮಹತ್ವದ ತೀರ್ಮಾನಕ್ಕೆ ಬಿಬಿಎಂಪಿ ಬಂದಿದೆ. ನಗರದಲ್ಲಿ 1430 ರೆವಿನ್ಯೂ ಬಡಾವಣೆಗಳಿದ್ದು, ಇಲ್ಲಿ ವಾಸಿಸುತ್ತಿರುವ ಲಕ್ಷಾಂತರ ಮಂದಿ ರೆವಿನ್ಯೂ ನಿವೇಶನದಾರರಿಗೆ ಈ ತೀರ್ಮಾನ ವರದಾನವಾಗಲಿದೆ.
ಅನಂತಕುಮಾರ್ ಹೆಸರಿನಲ್ಲಿ 65 ಸಾವಿರ ರೂ. ಮೌಲ್ಯದ ಲ್ಯಾಪ್ಟಾಪ್ ವಿತರಣೆ, 8 ವಲಯಗಳಲ್ಲಿ ಸುಷ್ಮಾಸ್ವರಾಜ್ ಹೆಸರಿನಲ್ಲಿ ಹೈಟೆಕ್ ಆಯಂಬುಲೆನ್ಸ್ ಸೇವೆ ಒದಗಿಸುವುದು, ದೀನದಯಾಳ್ ಹೆಸರಿನಲ್ಲಿ ಮಕ್ಕಳ ಆಸ್ಪತ್ರೆ ಆರಂಭಿಸುವ ಚಿಂತನೆಗಳು ಬಜೆಟ್ನಲ್ಲಿ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಬಿಬಿಎಂಪಿ ಆಸ್ಪತ್ರೆಗಳನ್ನು ಆಧುನೀಕರಣಗೊಳಿಸಲು, ವಾರ್ಡ್ ಮಟ್ಟದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಲು, ಕಸದ ಸಮಸ್ಯೆ ನಿವಾರಣೆಗೆ ಹಾಗೂ ಆರ್ಥಿಕವಾಗಿ ಹಿಂದುಳಿದ, ಸಾಮಾನ್ಯ ವರ್ಗದವರ ಒಂಟಿ ಮನೆ ನಿರ್ಮಾಣ, 75 ವರ್ಷ ಮೇಲ್ಪಟ್ಟ ಆಸಕ್ತ ಕಲಾವಿದರಿಗೆ ಸಹಾಯಧನ ನೀಡುವ ಬಗ್ಗೆ ಹಾಗೂ ಕನ್ನಡ ಪತ್ರಿಕೋದ್ಯಮ ಉಳಿಸುವ ನಿಟ್ಟಿನಲ್ಲಿ ಕೆಲವು ಯೋಜನೆಗಳನ್ನು ರೂಪಿಸಿಕೊಳ್ಳಲಾಗಿದೆ ಎನ್ನಲಾಗಿದೆ.
ಈ ಬಗ್ಗೆ ಮಾತನಾಡಿರುವ ಬಿಬಿಎಂಪಿಯ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್. ಶ್ರೀನಿವಾಸ್ ಅವರು, ಇದೇ ಮೊದಲ ಬಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡನೆ ಮಾಡಲಾಗುತ್ತಿದೆ. ಬಿಬಿಎಂಪಿಯ 2020-21ನೇ ಸಾಲಿನ ಬಜೆಟ್ ವಾಸ್ತವಿಕವಾಗಿರಲಿದ್ದು, ಈ ಬಾರಿ ಬಜೆಟ್ ಗಾತ್ರ 11 ಸಾವಿರ ಕೋಟಿ ರೂ. ಮೀರುವುದಿಲ್ಲ ಎಂದು ಹೇಳಿದ್ದಾರೆ.
ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು