ವಿಶಾಖಪಟ್ಟಣ(ಆಂಧ್ರ ಪ್ರದೇಶದ):ಆಂಧ್ರದ ವಿಶಾಖಪಟ್ಟಣದ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆಯಾದ ಪರಿಣಾಮ ಮೂರು ಮಕ್ಕಳು ಸೇರಿದಂತೆ ೧೦ ಮಂದಿ ಸಾವನ್ನಪ್ಪಿದ್ದು, ೨೦೦ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮುಂಜಾನೆ ೩.೩೦ರ ಸುಮಾರಿಗೆ ವಿಶಾಖಪಟ್ಟಣಂನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ ಆರ್ ಆರ್ ವೆಂಕಟಪುರAನಲ್ಲಿರುವ ಎಲ್.ಜಿ. ಪಾಲಿಮರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ರಾಸಾಯನಿಕ ಕಾಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲಿನ ಪ್ರದೇಶಗಳಿಗೆ ಹರಡಿದೆ.
ಪರಿಣಾಮ ಬೆಳಗ್ಗೆ ವಾಕಿಂಗ್ ಮತ್ತು ಇತರೆ ಕೆಲಸಗಳಿಗೆ ಬಂದಿದ್ದ ಜನರು ವಿಷಾನಿಲ ಸೇವಿಸಿ ಕೂಡಲೇ ಅಸ್ವಸ್ಥರಾಗಿದ್ದಾರೆ. ಕೆಲವರು ಹಾಗೇ ರಸ್ತೆಯಲ್ಲಿ ಉರುಳಿ ಬಿದ್ದಿದ್ದಾರೆ.ಮಾತ್ರವಲ್ಲದೆ ಈ ಪ್ರದೇಶದ ಸಾಕು ಪ್ರಾಣಿಗಳು ಕೂಡಾ ನರಳಿ ನರಳಿ ಉಸಿರು ನಿಲ್ಲಿಸಿದೆ. ಜೊತೆಗೆ ಹಾರಾಡುತ್ತಿದ್ದ ಹಕ್ಕಿಗಳು ತರಗೆಲೆಗಳಂತೆ ಉರುಳಿ ಬಿದ್ದಿವೆ.
ಸದ್ಯ ಈವರೆಗೂ ಇಬ್ಬರು ವೃದ್ಧರು, ೭ ವರ್ಷದ ಬಾಲಕಿ ಸೇರಿದಂತೆ ಒಟ್ಟು ೧೦ ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಐದು ಮಂದಿ ಆಸ್ಪತ್ರೆಗೆ ಸೇರಿಸುವ ಮುನ್ನವೇ ಸಾವನ್ನಪ್ಪಿದ್ದರು ಎಂದು ತಿಳಿದುಬಂದಿದೆ.
ಅಸ್ವಸ್ಥರನ್ನು ವಿಶಾಖಪಟ್ಟದ ಕಿಂಗ್ ಜಾರ್ಜ್ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇದೊಂದು ಆಸ್ಪತ್ರೆಯಲ್ಲೇ ಸುಮಾರು ೧೮೦ಕ್ಕೂ ಅಧಿಕ ಮಂದಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವಿಷಾನಿಲ ಸೋರಿಕೆಯಿಂದಾಗಿ ಕಾರ್ಖಾನೆಯ ಸುಮಾರು ೫ ಕಿ.ಮೀ ವ್ಯಾಪ್ತಿಯಲ್ಲಿ ಆತಂಕ ಸೃಷ್ಟಿಯಾಗಿದ್ದು, ಗೋಪಾಲಪಟ್ಟಣಂ ಸುತ್ತಲಿನ ಐದು ಗ್ರಾಮಗಳಲ್ಲಿನ ಜನರಿಗೆ ಉಸಿರಾಟದ ತೊಂದರೆ ಮತ್ತು ಗಂಟಲು ಕೆರೆತ ಸಮಸ್ಯೆ ಆರಂಭವಾಗಿದೆ.
ಇನ್ನು ನೂರಾರು ಮಂದಿ ಉಸಿರಾಟದ ಸಮಸ್ಯೆ, ಗಂಟಲು ನೋವು, ಕಣ್ಣಿನ ಉರಿ, ಹೊಟ್ಟೆ ನೋವು, ಇತರೆ ಸಮಸ್ಯೆಗಳಿಂದಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಅಸ್ವಸ್ಥರನ್ನು ಆಸ್ಪತ್ರೆಗೆ ರವಾನಿಸಲು ಇದೀಗ ಆಯಂಬುಲೆನ್ಸ್ ಗಳನ್ನು ಮತ್ತು ಸರ್ಕಾರಿ ಸಾರಿಗೆ ಬಸ್ ಗಳನ್ನು ಕೂಡ ನಿಯೋಜನೆ ಮಾಡಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ವಿಶಾಖಪಟ್ಟಣಂ ಮಹಾನಗರ ಪಾಲಿಕೆ ಮುನ್ನೆಚ್ಚರಿಕೆಗಾಗಿ ಸುತ್ತಮುತ್ತಲಿನ ನಾಗರಿಕರು ಮನೆಗಳಿಂದ ಹೊರಬರದಂತೆ ಮನವಿ ಮಾಡಿಕೊಂಡಿದೆ.
ಇತ್ತ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡಾ ಟ್ವೀಟ್ ಮಾಡಿದ್ದಾರೆ.
ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ವಿಶಾಖಪಟ್ಟಣ(ಆಂಧ್ರ ಪ್ರದೇಶದ)