ಕೆ.ಆರ್.ಪುರ(ಬೆಂಗಳೂರು): ವಲಸೆ ಕಾರ್ಮಿಕರಿಗೆ ವಿತರಿಸಬೇಕಾದ ದಿನಸಿ ಕಿಟ್ಗಳನ್ನು ಅಕ್ರಮ ದಾಸ್ತಾನು ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಅಂದ ಹಾಗೇ ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದ ರಾಮಮೂರ್ತಿ ನಗರದ ಲೋಟಸ್ ಕಲ್ಯಾಣ ಮಂಟಪದ ಬಳಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅಲ್ಲದೆ, ರಾಮಮೂರ್ತಿ ನಗರದಲ್ಲಿ ಲೋಟಸ್ ಕಲ್ಯಾಣ ಮಂಟಪದಲ್ಲಿ ಬಡವರಿಗೆ ವಿತರಿಸಬೇಕಾಗಿದ್ದ ಆಹಾರ ಸಾಮಾಗ್ರಿಗಳನ್ನು ಅಕ್ರಮ ಶೇಖರಣೆ ಮಾಡಲಾಗಿದ್ದು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಮಂತ್ರಿಗಳು, ಶಾಸಕರು ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.ಕಾರ್ಮಿಕ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಬಿಜೆಪಿ ಮುಖಂಡರ ಪ್ರಭಾವಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದರು.
ಇದಲ್ಲದೆ, ಆಹಾರ ಸಾಮಾಗ್ರಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ,ಚುನಾವಣೆ ಹಿತದೃಷ್ಟಿಯಿಂದ ಕಾರ್ಯಕರ್ತರಿಗೆ ಹಂಚಿಕೆಯಾಗುತ್ತಿದೆ, ಒಂದು ಕಣ್ಣಿಗೆ ಬೆಣ್ಣೆ ಹಾಗೂ ಒಂದು ಕಣ್ಣಿಗೆ ಸುಣ್ಣ ಹಚ್ಚುವ ಮೂಲಕ ಅಧಿಕಾರ ದುರುಪಯೋಗವಾಗುತ್ತಿದೆ.ಜೊತೆಗೆ ವಲಸೆ, ಕೂಲಿ ಕಾರ್ಮಿಕರಿಗೆ ಹಸಿವು ನೀಗಿಸುವ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸದೇ ಅವರು ವಲಸೆ ಹೋಗಲು ಕಾರಣರಾಗಿದ್ದಾರೆ ಎಂದು ಕಿಡಿಕಾರಿದರು.
ಈ ಕ್ಷೇತ್ರದಲ್ಲಿ ಆಗಿರುವ ಅಕ್ರಮದ ಹೊಣೆಗಾರ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಆಗಿದ್ದು, ಕೂಡಲೇ ರಾಜೀನಾಮೆ ನೀಡುವಂತೆ ಒತ್ತಾಯಿಸಿದರಲ್ಲದೆ, ಅಕ್ರಮ ದಾಸ್ತಾನಿಗೆ ಕಾರಣರಾದ ಅಧಿಕಾರಿಗಳನ್ನು ಅಮಾನತು ಮಾಡುವ ಮೂಲಕ ತಕ್ಷಣ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿದರು.
ಪರಿಸರ ಮಂಜುನಾಥ್ ಎಕ್ಸ್ ಪ್ರೆಸ್ ಟಿವಿ ಕೆ.ಆರ್.ಪುರ(ಬೆಂಗಳೂರು)