ಶಿರಾ: ವಿರೋಧ ಪಕ್ಷಗಳಿಗೆ ಟೀಕೆ ಮಾಡುವುದಕ್ಕೆ ಸರಿಯಾದ ವಿಷಯ ಸಿಗುತ್ತಿಲ್ಲ. ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುಡುಗಿದ್ದಾರೆ. 130 ಕೋಟಿ ಜನಸಂಖ್ಯೆ ಹೊಂದಿರುವ ನಮ್ಮ ಭಾರತ ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ತೆಗೆದುಕೊಂಡ ಕ್ರಮಗಳು ಅನನ್ಯ. ದೇಶದ ಹಿತದೃಷ್ಟಿಯಿಂದ ಲಾಕ್ ಡೌನ್ ಅನ್ನು ಹಾಗೆಯೇ ಮುಂದುವರೆಸುವ ಬದಲು ವಿಶ್ವ ಆರೋಗ್ಯ ಸಂಸ್ಥೆಯ ವರದಿ, ತಜ್ಞರ ಸಲಹೆ ಪಡೆದು ಕೇಂದ್ರ ಸರ್ಕಾರ ಲಾಕ್ ಡೌನ್ ಸಡಿಲಿಕೆ ಮಾಡಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಸೋಂಕು ನಿಯಂತ್ರಣದಲ್ಲಿದ್ದು, ಮರಣ ಪ್ರಮಾಣ ಕಡಿಮೆ ಇದೆ. ಇದೆಲ್ಲವನ್ನು ಗಮನಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಸಕಾಲಿಕ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದರು. ಕೋವಿಡ್ ಸೋಂಕು ವ್ಯಾಪಿಸುವುದನ್ನು ತಡೆಯಲು ರಾಜ್ಯ ಸರ್ಕಾರ ಕೈಗೊಂಡ ಕಾರ್ಯಗಳ ಬಗ್ಗೆ ಆರೋಪ ಮಾಡಿರುವ ಸಿದ್ದರಾಮಯ್ಯ ಕೊರೊನಾ ನಿಯಂತ್ರಣದ ಸಾಮಗ್ರಿ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ರು. ಈ ಎಲ್ಲಾ ಆರೋಪಕ್ಕೆ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.ನಿಮಗಿರುವ ಸಂಶಯಗಳ ಬಗ್ಗೆ ಎಲ್ಲ ಮಾಹಿತಿ ನೀಡಿ, ನಾವು ಉತ್ತರ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನಿಗೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ಸ್ ಪಕ್ಷದವರು ಮೊಸರಿನಲ್ಲಿ ಕಲ್ಲುಗಳನ್ನು ಹುಡುಕುವ ಕೆಲಸ ಮಾಡುತಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವವರು ತಿಹಾರ್ ಜೈಲಿನಲ್ಲಿ ಏಕೆ ಕುಳಿತುಕೊಳ್ಳುತ್ತಿದ್ದರು? ಕೊರೊನಾ ವೈರಸ್ ನಿಯಂತ್ರಣ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಆಡಳಿತ ಪಕ್ಷಕ್ಕೆ ಸಹಕಾರ ನೀಡುತ್ತಿಲ್ಲ. ನಾವು ವಿರೋಧ ಪಕ್ಷದಲ್ಲಿದ್ದಾಗ ಇಂತಹ ಸಂದರ್ಭ ಬಂದಾಗ ಸಹಕರಿಸಿದ್ದೇವೆ. ಕಿಟ್ ನಲ್ಲಿ ಹಗರಣ ಆಗಿದೆ ಅಂತ ಕಾಂಗ್ರೆಸ್ ಬಾಯಿಗೆ ಬಂದಂತೆ ಸುಮ್ಮನೆ ಮಾತನಾಡುತ್ತಿದೆ” ಎಂದು ಕಾಂಗ್ರೆಸ್ಸ್ ಪಕ್ಷದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.