ಕೊರಟಗೆರೆ: ಮಧುಗಿರಿಯ ಸ್ವಗೃಹದಲ್ಲಿ ಮಾಜಿ ಶಾಸಕ ಕೆ ಎನ್ ರಾಜಣ್ಣ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರದ ಬಗ್ಗೆ ಗುಡುಗಿದ್ದಾರೆ. ಇನ್ನೂ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಯುವಜನತೆ ವಿಜೇತರಾಗಿರುವುದು ಉತ್ತಮ ಬೆಳವಣಿಗೆ ತಂದಿದೆ. ಮಧುಗಿರಿ ವಿಧಾನಸಭಾ ಕ್ಷೇತ್ರದ 30 ಗ್ರಾಮಗಳಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ, ಜೆಡಿಎಸ್ ಪಕ್ಷ ಅಸ್ತಿತ್ವ ಉಳಿಸಿಕೊಳ್ಳಲು ಬೆಳಿಗ್ಗೆ ಒಂದು ಮಾತು ಸಂಜೆ ಒಂದು ಮಾತು ಆಡಿ ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರ, ವಿರೋಧ ಪಕ್ಷಗಳ ಶಾಸಕರಿರುವ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡದೆ ಮಲತಾಯಿ ಧೋರಣೆ ಮಾಡುತ್ತಿದೆ, ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದೇವೆ ಎಂದರು. ಇನ್ನೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋತಂತಹ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹಾಗೂ ಗೆದ್ದಂತಹ ಅಭ್ಯರ್ಥಿಗಳಿಗೆ ಸನ್ಮಾನ ಮಾಡುವುದಾಗಿ ತಿಳಿಸಿದರು. ಚುನಾಯಿತ ಜನಪ್ರತಿನಿಧಿಗಳು ಅವಧಿಗೆ ಮುನ್ನವೇ ರಾಜೀನಾಮೆ ನೀಡಿದರೆ ಮುಂದೆ ನಡೆಯುವ ಉಪಚುನಾವಣೆ ಖರ್ಚು ವೆಚ್ಚಗಳನ್ನು ಅವರೇ ಬರಿಸುವಂತೆ ಚುನಾವಣಾ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಲಿ, ಎಂದು ಕೇಂದ್ರಕ್ಕೆ ರಾಜಣ್ಣ ಒತ್ತಾಯಿಸಿದ್ದು, ಬಡ ಹಾಗೂ ಕೆಳವರ್ಗದ ಜನರ ಬಗ್ಗೆ ಕಾಳಜಿ ಇಲ್ಲದ ಸರ್ಕಾರ ಬಿಜೆಪಿ ಸರ್ಕಾರ ಎಂದು ಕಿಡಿಕಾರಿದರು.
ವರದಿ- ದೇವರಾಜ್ ಕೆ.ಎನ್. ಎಕ್ಸ್ ಪ್ರೆಸ್ ಟಿವಿ ಕೊರಟಗೆರೆ