ನವದೆಹಲಿ: 70ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ದೆಹಲಿಯ ರಾಜ್ಪಥ್ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನೆರವೇರಿಸಿದರು. ವಿಶೇಷವಾಗಿ ಈ ಬಾರಿ ದಕ್ಷಿಣ ಆಫ್ರೀಕಾದ ಅಧ್ಯಕ್ಷ ಸಿರಿಲ್ ರಾಮಪೋಸಾ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ರು. ಇನ್ನೂ ಈ ಕಾರ್ಯಕ್ರಮದಲ್ಲಿ ಅಮರ್ ಜವಾನ್ ಜ್ಯೋತಿ ಬಳಿ ಭಾರತದ ಹೆಮ್ಮೆಯಾಗಿರುವ ಮೂರು ಸೇನಾ ಪಡೆಗಳ ಮುಖ್ಯಸ್ಥರ ಉಪಸ್ಥಿತಿ ಇದ್ದರು.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಂಡಿಯಾ ಗೇಟ್ ಬಳಿ ಇರುವ ಅಮರ್ ಜವಾನ್ ಜ್ಯೋತಿ ಬಳಿ
ಯೋಧರಿಗೆ ಪುಷ್ಪ ನಮನ ಸಲ್ಲಿಸಿ, ಎರಡು ನಿಮಿಷ ಹುತಾತ್ಮರಾಗಿರುವರ ಆತ್ಮಕ್ಕೆ ಶಾಂತಿ ದೊರಕಲೆಂದು
ಮೌನಾಚರಣೆ ಮಾಡಿದರು. ಇನ್ನೂ ಈ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಕ್ಷಣಾ ಸಚಿವೆ
ನಿರ್ಮಲಾ ಸೀತಾರಾಮನ್, ಮುಂತಾದವರು ಉಪಸ್ಥಿತರಿದ್ದರು.
ಇನ್ನೂ ಮಹಾತ್ಮ ಗಾಂಧಿ ಅವರ 150ನೇ ವರ್ಷದ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿ ಕೇಂದ್ರ ಸರ್ಕಾರ ವಿಶೇಷವಾಗಿ ಮಹಾತ್ಮ ಗಾಂಧಿ ಅವರ ಪರಿಕಲ್ಪನೆ ಕುರಿತಾದ ಸ್ತಬ್ಧಚಿತ್ರಗಳನ್ನು ರಚಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿತ್ತು. ಹಾಗಾಗಿ ಎಲ್ಲಾ ರಾಜ್ಯಗಳು ಕೂಡ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರಿಗೆ ಸಂಬಂಧಪಟ್ಟಂತಹ ವಿವಿಧ ಸ್ತಬ್ಧ ಚಿತ್ರಗಳನ್ನು ಇಂದು ಪ್ರದರ್ಶಿಸಿತು.